‘ಬಾಸ್’ ಚಲನಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದರ್ಶನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ‘ಬಾಸ್’ ಚಲನಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈ ಮೂಲಕ ಸುಮಾರು ಒಂದೂವರೆ ತಿಂಗಳಿನಿಂದ ನಡೆದಿದ್ದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ‘ಬಾಸ್’ ಚಿತ್ರತಂಡಕ್ಕೆ ಮಹತ್ವದ ಜಯ ದೊರೆತಿದೆ. ಈ ವಿಷಯವನ್ನು ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ಮಾಪಕ ತನುಷ್ ಶಿವಣ್ಣ ಮಾತನಾಡಿ, “ನಮ್ಮ ಚಿತ್ರದ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು. ನ್ಯಾಯದ ಗೆಲುವಿನೊಂದಿಗೆ ‘ಬಾಸ್’ ಚಿತ್ರ ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರುತ್ತಿದೆ. ಪ್ರೇಕ್ಷಕರು ಚಿತ್ರವನ್ನು ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ”. ಚಿತ್ರ ಬಿಡುಗಡೆಗೂ ಮುನ್ನ ವಿಜಯಲಕ್ಷ್ಮಿ ದರ್ಶನ್ ಅವರನ್ನು ಭೇಟಿ ಮಾಡಿ ಮಾತನಾಡುವ ಪ್ರಯತ್ನ ಮಾಡುತ್ತೇನೆ ಎಂದರು.

ನಿರ್ದೇಶಕ ಲವ ವಿ ಮಾತನಾಡಿ, “ಸುಮಾರು ಒಂದೂವರೆ ತಿಂಗಳಿನಿಂದ ನ್ಯಾಯಾಲಯದಲ್ಲಿ ನಿರಂತರ ಕಾನೂನು ಹೋರಾಟ ನಡೆಸಿದ್ದೇವೆ. ಇಂದು ಸತ್ಯ ಮತ್ತು ನ್ಯಾಯಕ್ಕೆ ಜಯ ದೊರೆತಿದೆ. ಭಾರತದ ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಮಗೆ ಅಚಲ ನಂಬಿಕೆ ಇದೆ. ನ್ಯಾಯ ಎಲ್ಲರಿಗೂ ಒಂದೇ. ನ್ಯಾಯಾಂಗದ ಮೇಲೆ ನಮ್ಮ ಗೌರವ ಮತ್ತು ವಿಶ್ವಾಸ ಇನ್ನಷ್ಟು ಗಟ್ಟಿಯಾಗಿದೆ.” ನಮ್ಮ ಪರವಾಗಿ ವಾದ ಮಂಡಿಸಿದ ವಿವೇಕ್ ಸುಬ್ಬಾರೆಡ್ಡಿ ಮತ್ತು ತಂಡದವರಿಗೆ ಈ ಸಮಯದಲ್ಲಿ ಧನ್ಯವಾದ ತಿಳಿಸುತ್ತೇನೆ. ಈ ಸಂದರ್ಭದಲ್ಲಿ ದರ್ಶನ್ ಅವರ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಸಮಯ ಕೇಳಿದರು. ಯಾರನ್ನು ನೋಯಿಸುವ ಉದ್ದೇಶ ನಮಗಿಲ್ಲ. ಈ ಚಿತ್ರ ನಿರ್ದೇಶಕನ ಕಲ್ಪನೆಯ ಕೂಸು. ಟ್ರೇಲರ್ ಅನಾವರಣ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರವನ್ನು ಕೂಡ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ಚಿತ್ರದಲ್ಲಿ ನಟಿಸಿರುವ ವೀರೇನ್ ಕೇಶವ್, ಭೀಷ್ಮ, ಲಕ್ಷ್ಮಣ್ ಪೂಜಾರಿ, ಸಹ ನಿರ್ದೇಶಕ ಮಂಜುನಾಥ್, ಸಂಗೀತ ನಿರ್ದೇಶಕ ಡೆವಿ ಸುರೇಶ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

